ಪದ್ಮುಂಜ ಹೈಸ್ಕೂಲ್ ಶಿಕ್ಷಕರ 100 % ಫಲಿತಾಂಶದ ವ್ಯಾಮೋಹ: ಇಬ್ಬರು ಹೆಣ್ಣು ಮಕ್ಕಳಿಗೆ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗೆ ಅವಕಾಶ ನಿರಾಕರಿಸಿ ಅವಮಾನ

ಬೆಳ್ತಂಗಡಿ : 100 % ಫಲಿತಾಂಶದ ವ್ಯಾಮೋಹದಲ್ಲಿ ಇಬ್ಬರು ಹೆಣ್ಣು ಮಕ್ಕಳಿಗೆ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗೆ ಅವಕಾಶ ನಿರಾಕರಿಸಿ ಅವಮಾನಿಸಿದ ಘಟನೆ ಕಣಿಯೂರು ಗ್ರಾಮದ ಪದ್ಮುಂಜ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವೃಂದದಿಂದ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸೆಸ್ಸೆಲ್ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರನ್ನು ಅವಕಾಶ ವಂಚಿತರಾಗಿಸಿದ ಪ್ರಸಂಗ ಬೆಳಕಿಗೆ ಬಂದಿದ್ದು 100 % ಫಲಿತಾಂಶದ ಗೀಳಿನಿಂದ ಶಿಕ್ಷಕರು ಬಡ ಹೆಣ್ಣು ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಕಾರಣವಾಗಿದೆ ಎಂಬ ಆರೋಪ ಪೋಷಕರಿಂದ ಕೇಳಿ ಬಂದಿದೆ.
ಖಾಸಗಿ ಶಾಲೆಗಳು ಶೇ.100 ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಭತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಾ ಇದೆ. ಸರಕಾರಿ ಶಾಲೆಯು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದುಕೊಂಡು ಬರುತ್ತಿದ್ದರೂ ಈ ಶೈಕ್ಷಣಿಕ ವರ್ಷದಲ್ಲಿ ಪದ್ಮುಂಜದ ಸರಕಾರಿ ಶಾಲೆಯ ಶಿಕ್ಷಕ ವೃಂದವು ಶೇ.100 ಎಂಬ ಗೀಳಿಗೆ ಬಿದ್ದು ಇಬ್ಬರು ಹೆಣ್ಮಕ್ಕಳನ್ನು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ನೆಪವೊಡ್ಡಿ ಪರೀಕ್ಷೆ ಬರೆಯಲು ಅವಕಾಶ ಕೊಡದೆ ವಂಚಿಸಿರುವುದಾಗಿ ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯ್ದಿನ್ ಕುಟ್ಟಿ ಆರೋಪಿಸಿದ್ದಾರೆ.

ಶಿಕ್ಷಕ ವೃಂದದ ಈ ನಡೆಯು ತೀರಾ ಅಕ್ಷಮ್ಯವಾಗಿದೆ. ತಮಗಾದ ಅನ್ಯಾಯದ ಬಗ್ಗೆ ಹೆಣ್ಮಕ್ಕಳು ಮಕ್ಕಳ ಹಕ್ಕುಗಳ ಆಯೋಗ, ಉಪನಿರ್ದೇಶಕರು, ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟವರು ಇದರ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ, ತಪ್ಪಿತಸ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ (ರಿ)ಯ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ ಆಗ್ರಹಿಸಿದ್ದಾರೆ.

Post Comment